ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದ ಮುಖ್ಯಮಂತ್ರಿ
ಬೆಂಗಳೂರು: ಅಂಗಾಂಗ ದಾನಿಗಳ ಕುಟುಂಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸನಾ ಪತ್ರ ವಿತರಿಸಿ ಮಾತನಾಡಿದ ಮುಖ್ಯಮಂತ್ರಿ, ಅಂಗಾಂಗ ದಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಒಬ್ಬರ ಜೀವ ಹೋದ ಸಂದರ್ಭದಲ್ಲಿ ಮತ್ತೋರ್ವರ ಜೀವ ಉಳಿಸುವ ಬಗ್ಗೆ ಯೋಚಿಸುವುದು ಸಾಮಾನ್ಯ ಸಂಗತಿಯಲ್ಲ. ಅಂಗಾಂಗ ದಾನ ಹೆಚ್ಚಾಗಬೇಕು ಎಂದು ತಿಳಿಸಿದರು.
ನೀವು ಕೈಗೊಂಡ ನಿರ್ಧಾರ ಸುಲಭವಲ್ಲ.ಇತರರ ಜೀವ ಉಳಿಸುವ ಕೆಲಸ ಮಾಡಿದ್ದೀರಿ, ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.
ಸಿದ್ದರಾಮಯ್ಯ, ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನಿಮ್ಮ ಜೊತೆಗೆ ಇರಲಿದೆ ಎಂದು ಧೈರ್ಯ ತುಂಬಿದರು. ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಂಗಾಂಗ ದಾನ ಕೋರಿ ನೋಂದಾಯಿಸಿಕೊಂಡವರ ಸಂಖ್ಯೆ 8,000ಕ್ಕೂ ಹೆಚ್ಚಿದ್ದು, ಕಳೆದೊಂದು ವರ್ಷದಲ್ಲಿ ಕೇವಲ 178 ಅಂಗಾಂಗ ದಾನ ನಡೆದಿದೆ ಎಂದು ತಿಳಿಸಿದರು.