For the best experience, open
https://m.newskannada.com
on your mobile browser.
Advertisement

ಜನವರಿ 24-28 ಕುಡ್ಲ ಸ್ಟ್ರೀಟ್ ಫುಡ್ ಫೆಸ್ಟ್-2: ಉತ್ತರ-ದಕ್ಷಿಣ ಭಾರತ ಶೈಲಿಯ ವಿವಿಧ ಖಾದ್ಯವೈವಿಧ್ಯ

'ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜ.24ರಿಂದ 28ರವರೆಗೆ ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟಿವಲ್ ದ್ವಿತೀಯ ಆವೃತ್ತಿಯ ಕಾರ್ಯಕ್ರಮ ಆಯೋಜಿಸಲಾಗಿದೆ. ಜನವರಿ 24ರ ಸಂಜೆ 7 ಗಂಟೆಗೆ ಸೀಸನ್-2ಗೆ ಅಧಿಕೃತ ಚಾಲನೆ ದೊರೆಯಲಿದೆ' ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ನಗರದ ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
08:45 PM Jan 23, 2024 IST | Ashitha S
ಜನವರಿ 24 28 ಕುಡ್ಲ ಸ್ಟ್ರೀಟ್ ಫುಡ್ ಫೆಸ್ಟ್ 2  ಉತ್ತರ ದಕ್ಷಿಣ ಭಾರತ ಶೈಲಿಯ ವಿವಿಧ ಖಾದ್ಯವೈವಿಧ್ಯ

ಮಂಗಳೂರು: "ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜ.24ರಿಂದ 28ರವರೆಗೆ ಮಂಗಳೂರು ಸ್ಟ್ರೀಟ್ ಫುಡ್ ಫೆಸ್ಟಿವಲ್ ದ್ವಿತೀಯ ಆವೃತ್ತಿಯ ಕಾರ್ಯಕ್ರಮ ಆಯೋಜಿಸಲಾಗಿದೆ. ಜನವರಿ 24ರ ಸಂಜೆ 7 ಗಂಟೆಗೆ ಸೀಸನ್-2ಗೆ ಅಧಿಕೃತ ಚಾಲನೆ ದೊರೆಯಲಿದೆ" ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ನಗರದ ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

Advertisement

ಕಳೆದ ವರ್ಷದ ಮಂಗಳೂರಿನ "ಸ್ಟ್ರೀಟ್ ಫುಡ್ ಫಿಯೆಸ್ಟ" ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನಮನ್ನಣೆ ಪಡೆದು ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸೇ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ -2 ಗೆ ಪ್ರೇರಣೆಯಾಗಿದ್ದು ಈಗಾಗಲೇ ಸಾರ್ವಜನಿಕ ವಲಯದಿಂದ ಅತ್ಯುತ್ತಮ ಸ್ಪಂದನೆ ಹಾಗೂ ನಿರೀಕ್ಷೆ ಲಭಿಸಿದೆ. "ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವ" ದವರೆಗೆ ಪ್ರತಿ ನಿತ್ಯ ಸಂಜೆ 4ರಿಂದ ರಾತ್ರಿ 10.30 ರವರೆಗೆ (ಕೊನೆಯ ಮೂರು ದಿನ, ಶುಕ್ರವಾರ ಶನಿವಾರ ಮತ್ತು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10.30 ತನಕ) ಸ್ಟ್ರೀಟ್ ಫುಡ್ ಫಿಯೆಸ್ಟಾ ನಡೆಯಲಿರುವ ಸ್ಥಳಗಳಲ್ಲಿ ಮಳಿಗೆ ನಿರ್ಮಾಣ ಸಹಿತ ಎಲ್ಲಾ ತಯಾರಿಗಳು ಬಹುತೇಕ ಪೂರ್ಣಗೊಂಡಿದ್ದು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ -2 ನಲ್ಲಿ ಭಾಗವಹಿಸಲು ಆನ್ಲೈನ್ ನಲ್ಲಿ ನೋಂದಣಿಯಾಗಿದ್ದ ಹೆಚ್ಚಿನ ಸಂಖ್ಯೆಯ ಮಳಿಗೆಗಳಿಂದ 160 ಸಂಖ್ಯೆಯ ವಿಶೇಷ ಆಹಾರ ಮಳಿಗೆಗಳನ್ನು ಅಂತಿಮಗೊಳಿಸಲಾಗಿದೆ.

Advertisement

ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ:
ಸ್ಟ್ರೀಟ್ ಫುಡ್ ಫಿಯೆಸ್ಟಾ ಸೀಸನ್-2 ನಲ್ಲಿ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ, ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ.

ಡಿಜಿಟಲ್ ವಹಿವಾಟಿಗೆ ಹೆಚ್ಚು ಉತ್ತೇಜನ:
ಈ ಬಾರಿ ಫುಡ್ ಫಿಯೆಸ್ಟಾದಲ್ಲಿ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗ್ರಾಹಕರು ಹಾಗೂ ಮಳಿಗೆದಾರರ ನಡುವೆ ನಗದು ಅಥವಾ ಕ್ಯಾಶ್ ರೂಪದ ವ್ಯವಹಾರಕ್ಕಿಂತ ಎಲ್ಲಾ ಮಳಿಗೆದಾರರಿಗೂ ನೀಡಲಾಗಿರುವ ಪ್ರತ್ಯೇಕ ಕ್ಯೂಆರ್ ಕೋಡ್ ಸ್ಕ್ಯಾನ್ ಬಳಸಲು ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಸಂಪೂರ್ಣ ಡಿಜಿಟಲ್ ವಹಿವಾಟು ಭವಿಷ್ಯದ ಭಾರತದ ಮುನ್ನೋಟವಾಗಿದ್ದು ಜನರನ್ನು ಆ ನಿಟ್ಟಿನಲ್ಲಿ ಪ್ರೇರೇಪಿಸುವ ಪ್ರಯತ್ನವೂ ಇದಾಗಿದೆ.

ಪಾರ್ಕಿಂಗ್ ವ್ಯವಸ್ಥೆ:
ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತಿರಲು ಈ ಬಾರಿ ಕ್ರಮಬದ್ಧವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು ಕೊಟ್ಟಾರ ಚೌಕಿ ಕಡೆಯಿಂದ ಬರುವ ವಾಹನಗಳಿಗೆ ಉರ್ವ ಚರ್ಚ್ ಆವರಣ, ಉರ್ವ ಆಟದ ಮೈದಾನ, ಹಾಗೂ ಲೇಡಿಹಿಲ್ ವಿಕ್ಟೋರಿಯಾ ಕಾಂಪೋಸಿಟ್ ಪಿಯು ಕಾಲೇಜು ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಲಾಲ್ ಬಾಗ್ ಕಡೆಯಿಂದ ಬರುವ ವಾಹನಗಳಿಗೆ ಕೆನರಾ ಉರ್ವ ಶಾಲೆಯ ಆವರಣ ಮತ್ತು ಕರಾವಳಿ ಉತ್ಸವ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ನಿಗದಿತ ಸ್ಥಳಗಳಲ್ಲದೇ, ರಸ್ತೆಯ ಬದಿಯಲ್ಲಿ ಎಲ್ಲಿಯೂ ವಾಹನ ಪಾರ್ಕಿಂಗ್ ಮಾಡದೇ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಆಯೋಜಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕಿಡ್ ಜೋನ್ ಗೆ ವಿಶೇಷ ಪ್ರಾಧಾನ್ಯತೆ:
ಇನ್ನುಳಿದಂತೆ ಕಳೆದ ಬಾರಿ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಈ ಬಾರಿಯೂ ಸಹ ಇರಲಿದ್ದು ಮಕ್ಕಳ ಆಟದ ಜೋನ್ ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದ್ದು, ಉತ್ಸವದ ಸಮಯದಲ್ಲಿ ಹಲವು ವೇದಿಕೆಗಳಲ್ಲಿ ಏಕಕಾಲಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾನ್ವಿತರಿಗಾಗಿ "ನಮ್ಮ ವೇದಿಕೆ- ನಿಮ್ಮ ಪ್ರತಿಭೆ", ಸೆಲ್ಫಿ ಕೌಂಟರ್, ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ವೇದಿಕೆಗಳಲ್ಲಿ ಆಚರಿಸಲು ಅವಕಾಶ, ಹೀಗೆ ಒಟ್ಟಾರೆಯಾಗಿ ಐದು ದಿನಗಳ ಕಾಲ ನಡೆಯುವ ಈ ಆಹಾರ ಉತ್ಸವಕ್ಕೆ ಎಲ್ಲರಿಗೂ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನವು ಆದರದ ಸ್ವಾಗತವನ್ನು ಕೋರುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ್, ರಾಘವೇಂದ್ರ ಹೊಳ್ಳ, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಉದಯ ಪೂಜಾರಿ ಉಪಸ್ಥಿತರಿದ್ದರು.

Advertisement
Tags :
Advertisement