ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೆಚ್.ಡಿ ರೇವಣ್ಣ
ಬೆಂಗಳೂರು: ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ನೇರವಾಗಿ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ತಂದೆ-ತಾಯಿ ಜೊತೆ ಮಾತನಾಡಿ ಹೊರಡುವ ಸಂದರ್ಭದಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಕಂಡು ರೇವಣ್ಣ ಕಣ್ಣೀರು ಹಾಕಿದ್ದಾರೆ.
ನೀವು ಅಳಬೇಡಿ ಕಣಣ್ಣ ಎಂದು ಡಿಕೆಶಿ ವಿರುದ್ಧ ಕಾರ್ಯಕರ್ತರು ಕಿಡಿಕಾರಿದರು. ಈ ವೇಳೆ ರೇವಣ್ಣ ಅವರು, ಹಾಗೆಲ್ಲ ಮಾತನಾಡಬಾರದು ಅಂದಾಗ ಯಾಕಣ್ಣ ಮಾತಾಡಬಾರದು ಎಂದು ಕಾರ್ಯಕರ್ತರು ರೊಚ್ಚಿಗೆದ್ದರು. ರೇವಣ್ಣ ಜೊತೆ ಕೆಲ ಕಾರ್ಯಕರ್ತರು ಕೂಡ ಕಣ್ಣೀರು ಹಾಕಿದ್ದಾರೆ. ಬಳಿಕ ಅಲ್ಲಿಂದ ತೆರಳಿದರು.
ಕೆ.ಆರ್.ನಗರ ಸಂತ್ರಸ್ತೆಯನ್ನು ಅಪಹರಣ ಮಾಡಿಸಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣಗೆ ಕಡೆಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಇಂದು ಬಿಡುಗಡೆಯಾದರು.
ಸೋಮವಾರ ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಜಾಮೀನು ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಂಜೆ 6:30ಕ್ಕೆ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸಂಜೆಯಾದ ಕಾರಣ ಕೋರ್ಟ್ ಸಮಯ ಮುಗಿದಿದ್ದರಿಂದ ಷರತ್ತು ಪೂರೈಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಮಧ್ಯಾಹ್ನ ಎಲ್ಲಾ ಪ್ರಕ್ರಿಯೆ ಮುಗಿಸಿ ರೇವಣ್ಣ ಬಿಡುಗಡೆಯಾದರು.