ಶಿಬರೂರು: ಏ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವ
ಸುರತ್ಕಲ್: 1976ರಲ್ಲಿ ಶಿಬರೂರುಗುತ್ತು ಮುದ್ದಣ್ಣ ಶೆಟ್ಟರ ಮುತುವರ್ಜಿಯಲ್ಲಿ ಶಿಬರೂರು ಕ್ಷೇತ್ರವು ಸಂಪೂರ್ಣ ನವೀಕರಣಗೊಂಡಿದ್ದು, 2010ರಲ್ಲಿ ಕೊಂಜಾಲಗುತ್ತು ಪ್ರಭಾಕರ ಶೆಟ್ಟರ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದಿಂದ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡು ಈಗ ಮತ್ತೊಮ್ಮೆ ನೂತನ ಧ್ವಜಸ್ತಂಭ ಸಹಿತ ಸುತ್ತುಪೌಳಿ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಈ ವರ್ಷ ಕೈಗೊಂಡಿದ್ದು ಪುನರ್ ನಿರ್ಮಾಣ ನಡೆಯುತ್ತಿದೆ.
ಕ್ಷೇತ್ರವು ದೈವ ಕ್ಷೇತ್ರ ಮಾತ್ರವಲ್ಲದೆ ನಾಗ ಕ್ಷೇತ್ರವು ಆಗಿರುತ್ತದೆ. ಕ್ಷೇತ್ರದ ವಿಶೇಷವೇನೆಂದರೆ ಬ್ರಹ್ಮಕುಂಭಾಭಿಷೇಕ ನಡೆಯುವ ಸಂದರ್ಭದಲ್ಲಿ ನಾಗಮಂಡಲ ಸೇವೆಯು ನಡೆಯುವುದು ಗಮನಾರ್ಹ. ಏಪ್ರಿಲ್ 22ರಿಂದ 30ರ ತನಕ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಕಾರ್ಯಕ್ರಮಗಳು ಜರಗಲಿದೆ.
26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದ್ದು ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ಜರುಗಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದ್ದು ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಕ್ಷೇತ್ರದಲ್ಲಿ ಸಂಪೂರ್ಣ ಅಭಿವೃದ್ಧಿ ಕಾಮಗಾರಿಗಳು ವೇಗಗತಿಯಲ್ಲಿ ನಡೆಯುತ್ತಿದೆ. ದೈವಕ್ಕೆ 2 ಕೋಟಿ ಮೌಲ್ಯದ ಸ್ವರ್ಣ ಪಲ್ಲಕ್ಕಿಯನ್ನು ತಾರೀಕು 19 ರಂದು ಶ್ರೀ ಕ್ಷೇತ್ರ ಕಟೀಲಿನಿಂದ ಸಂಜೆ 4 ಗಂಟೆಗೆ ವಿಜೃಂಭಣೆಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ಊರ ಪರವೂರ ಭಕ್ತರು ಸೇವೆಯ ರೂಪದಲ್ಲಿ ಸಲ್ಲಿಸಲಿದ್ದಾರೆ.
ರಸ್ತೆ ಅಭಿವೃದ್ಧಿ ಮತ್ತು ನೂತನ ಗೋಪುರ ನಿರ್ಮಾಣ ಮತ್ತು ಸುತ್ತುಪೌಳಿ ಕಾಮಗಾರಿ ಪ್ರಗತಿಯಲ್ಲಿದೆ. ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳನ್ನು ಸ್ವಾಮೀಜಿಗಳ ಸಮಕ್ಷಮದಲ್ಲಿ ಧಾರ್ಮಿಕ ಮುಖಂಡರ ಹಾಗೂ ಅನೇಕ ಸಾಂಸ್ಕೃತಿಕ ತಂಡಗಳ ಹಾಗೂ ಭಜನಾ ಮಂಡಳಿಗಳ ಮುಖಾಂತರ ನಿರಂತರ ಭಜನಾ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ.
ಕಟೀಲು ಕ್ಷೇತ್ರಕ್ಕೂ ಕೊಡಮಣಿತ್ತಾಯ ಕ್ಷೇತ್ರಕ್ಕೂ ಅವಿನಾಭಾವ ನಂಟಿದೆ. ಕಟೀಲು ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ದೇವಿ ಮತ್ತು ದೈವದ ಭೇಟಿ ಅಪರೂಪವಾಗಿದೆ. ಬ್ರಹ್ಮಕುಂಭಾಭಿಷೇಕ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ದೇಶ ವಿದೇಶಗಳಲ್ಲಿ ಸಾಕಷ್ಟು ಸಂಖ್ಯೆಯ ಭಕ್ತರು ದೈವದ ಸೇವೆಯಲ್ಲಿ ಕೈಜೋಡಿಸಲಿದ್ದಾರೆ.
ಕಳೆದ 8 ತಿಂಗಳಲ್ಲಿ 3.5 ಕೋಟಿ ವೆಚ್ಚದ ಸಿವಿಲ್ ಕಾಮಗಾರಿ, 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬ್ರಹ್ಮಕುಂಭಾಭಿಷೇಕ ಸಂದರ್ಭದಲ್ಲಿ ನಿತ್ಯ ಉಪಹಾರ, ಅನ್ನದಾನ ನಡೆಯಲಿದ್ದು ರಾಜ್ಯಾದ್ಯಂತ 3-4 ಲಕ್ಷ ಜನ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಕೋಂಜಾಲಗುತ್ತು ಪ್ರಭಾಕರ ಶೆಟ್ಟಿ ಇವರು ಬ್ರಹ್ಮಕಲಶ ಮತ್ತು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿದ್ದು, 22 ಸಮಿತಿಗಳನ್ನು ರಚಿಸಲಾಗಿದೆ ಹಾಗೂ ಪ್ಲ್ಯಾಸ್ಟಿಕ್ ಮುಕ್ತವಾಗಿ ಮಾಡಲು ನಿರ್ಧರಿಸಲಾಗಿದೆ. ಶ್ರೀ ಕ್ಷೇತ್ರದ ವತಿಯಿಂದ ಕೆಎಂಸಿ ಆಸ್ಪತ್ರೆ ಹಾಗೂ ದುರ್ಗಾ ಸಂಜೀವಿನಿ ಟ್ರಸ್ಟ್ ಇದರ ವತಿಯಿಂದ ಪ್ರತೀ ತಿಂಗಳು ಎರಡು ಬಾರಿ ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ.
ಆಂಗ್ಲ ಮಾಧ್ಯಮ ಶಾಲೆ
ದೈವಸ್ಥಾನದ ವತಿಯಿಂದ ಪ್ರತಿ ತಿಂಗಳು ವೈದಕೀಯ ತಪಾಸಣೆ ಹಾಗೂ ದೈವಸ್ಥಾನದ ವತಿಯಿಂದ ಈಗಾಗಲೇ ಶ್ರೀ ಕೊಡಮಣಿತ್ತಾಯ ಆಂಗ್ಲ ಮಾಧ್ಯಮ ಶಾಲೆ ಕಳೆದ ವರ್ಷ ಎಲ್ ಕೆಜಿ ಪ್ರಾರಂಭಿಸಿದ್ದು, ಬರುವ ವರ್ಷ ನರ್ಸರಿ ಹಾಗೂ ಯುಕೆಜಿ ಪ್ರಾರಂಭಗೊಳ್ಳಲಿದೆ.
ಶಿಬರೂರು ಕ್ಷೇತ್ರದ ಇತಿಹಾಸ:
ಕೊಡಮಣಿತ್ತಾಯ ಕ್ಷೇತ್ರವು ಮಂಗಳೂರಿನಿಂದ 25 ಕಿ.ಮೀ. ದೂರದಲ್ಲಿ ಕಟೀಲು ಕ್ಷೇತ್ರದಿಂದ 2 ಕಿ.ಮೀ (ಕಿನ್ನಿಗೋಳಿಯಿಂದ 3 ಕಿ.ಮೀ) ದೂರದಲ್ಲಿ ಪ್ರಕೃತಿ ರಮಣೀಯ ಕಾರಣಿಕ ಕ್ಷೇತ್ರವಾಗಿದ್ದು ನಂದಿನಿ ತಟದಲ್ಲಿ ಶ್ರೀ ಉಳ್ಳಾಯ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳು ಸುಮಾರು 700 ವರ್ಷಗಳ ಹಿಂದೆ ದೈವ ಭಕ್ತರಾದ ಶಿಬರೂರು ಗುತ್ತು ತಿಮ್ಮತ್ತಿ ಕರಿವಾಳರವರ ಭಕ್ತಿಗೆ ಒಲಿದು ನೆಲೆ ನಿಂತಿವೆ.
ಶ್ರೀ ಕ್ಷೇತ್ರ ಶಿಬರೂರಿಗೂ ಶ್ರೀ ಕ್ಷೇತ್ರ ಕಟೀಲಿಗೂ ಅವಿನಾಭಾವ ಸಂಬಂಧವಿದ್ದು ಕಟೀಲು ಜಾತ್ರಾ ಸಂದರ್ಭದಲ್ಲಿ ಶ್ರೀ ದೈವವು ಭೇಟಿ ನೀಡುತ್ತಿರುವುದು ಅನಾದಿಕಾಲದಿಂದ ನಡೆದುಕೊಂಡು ಬಂದಿದೆ. ಶ್ರೀ ಕ್ಷೇತ್ರವು ಮುಜರಾಯಿ ಇಲಾಖೆಗೆ ಸಂಬಂಧಪಟ್ಟ 'A' ದರ್ಜೆಯ ದೈವಸ್ಥಾನವಾಗಿದ್ದು ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಧನು ಸಂಕ್ರಮಣದಂದು ಧ್ವಜಾರೋಹಣಗೊಂಡು ಎಂಟು ದಿನಗಳ ಪರ್ಯಂತ ಜಾತ್ರಾ ಮಹೋತ್ಸವ ಜರುಗುತ್ತಿದ್ದು, ಲಕ್ಷಾಂತರ ಭಕ್ತರ ಆರಾಧ್ಯ ಕೇಂದ್ರವಾಗಿದೆ. ಕ್ಷೇತ್ರದ ತೀರ್ಥವು ವಿಷವನ್ನು ಅಮೃತ ಮಾಡುವಂತಹ ಶಕ್ತಿಯನ್ನು ಹೊಂದಿದ್ದು ಲಕ್ಷಾಂತರ ಭಕ್ತರು ತೀರ್ಥವನ್ನು ಸೇವಿಸಿ ಧನ್ಯರಾಗುತ್ತಾರೆ.
ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಯ ಕಲಶ ಸಮರ್ಪಣೆ
ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಸಹೋದರಿ ಶಮಿತಾ ಶೆಟ್ಟಿಯೊಂದಿಗೆ ಮೂರು ದಿನಗಳ ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಿಲ್ಪಾ ಶೆಟ್ಟಿ ಬೆಳ್ಳಿಯ ಕಲಶ ನೀಡಿದ್ದಾರೆ. ಕೊಡಮಣಿತ್ತಾಯನ ಮೇಲಿನ ಭಕ್ತಿಯಿಂದ ಚಿನ್ನದ ಪಲ್ಲಕ್ಕಿಗಾಗಿ ಭಕ್ತರು ತಮ್ಮ ಒಡವೆಯನ್ನೇ ದಾನ ರೂಪವಾಗಿ ನೀಡುತ್ತಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕೋಂಜಾಲಗುತ್ತು ಪ್ರಭಾಕರ ಎಸ್ ಶೆಟ್ಟಿ, ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ, ಪ್ರದ್ಯುಮ್ನ ರಾವ್, ಕೈಯ್ಯೂರಗುತ್ತು, ತುಕಾರಾಮ ಶೆಟ್ಟಿ ಪರ್ಲಬೈಲುಗುತ್ತು, ಎಂ ಮಧುಕರ್ ಅಮೀನ್, ಸುಬ್ರಮಣ್ಯ ಪ್ರಸಾದ್ ಕೋರ್ಯಾರು ಮುಂತಾದವರು ಇದ್ದರು.