ಪ್ರಾಂಶುಪಾಲರನ್ನು ಅಮಾನತ್ತಿಗೆ ಆಗ್ರಹಿಸಿ ಅಂಬೇಡ್ಕರ್ ವಸತಿ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ
ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಸ್ವಗ್ರಾಮವಾದ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲಾ ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಜಮಾಯಿಸಿ ಪ್ರಾಂಶುಪಾಲನ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಾವು ಯಾವುದೇ ಕಾರಣಕ್ಕೂ ಅಂಬೇಡ್ಕರ್ ವಸತಿ ಶಾಲೆಯ ಒಳಗೆ ಪ್ರವೇಶ ಮಾಡುವುದಿಲ್ಲ. ವಸತಿ ಶಾಲೆಯಲ್ಲಿ ನಮಗೆ ಯಾವುದೇ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲರಾಗಿರುವ ಪ್ರಾಂಶುಪಾಲರಾದ ಪ್ರಸನ್ನ ಕುಮಾರ್ ಎಂಬುವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕುಡಿಯಲು ನೀರಿಲ್ಲ. ಬಳಕೆಗೆ ಶೌಚಾಲಯ ಇಲ್ಲ, ಮೂಲಭೂತ ಸೌಕರ್ಯಗಳಿಲ್ಲ. ಸರ್ಕಾರದಿಂದ ಬರುತ್ತಿರುವ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ ಮಹದೇವಪ್ಪ ರವರ ಸ್ವಗ್ರಾಮ ಹದಿನಾರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳ ತಾಳ್ಮೆ ಕಟ್ಟೆ ಹೊಡೆದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಸಾರ್ವಜನಿಕರು ಸಾಮೂಹಿಕವಾಗಿ ವಿದ್ಯಾರ್ಥಿಗಳ ಜೊತೆ ಕೈಜೋಡಿಸಿ ಪ್ರತಿಭಟಿಸುತ್ತಿದ್ದಾರೆ.