ಫೆಬ್ರವರಿ 6ರಿಂದ ಸುತ್ತೂರು ಜಾತ್ರಾ ಮಹೋತ್ಸವ
ಮೈಸೂರು: ನಂಜನಗೂಡು ತಾಲೂಕು ಸುತ್ತೂರು ಶ್ರೀ ಕ್ಷೇತ್ರದ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವನ್ನು ಸುತ್ತೂರು ಕ್ಷೇತ್ರದಲ್ಲಿ ಫೆಬ್ರವರಿ 6 ಮಂಗಳವಾರದಿಂದ 11 ಭಾನುವಾರದವರೆಗೆ ಆರು ದಿನಗಳ ಕಾಲ ಸಡಗರ ಸಂಭ್ರಮದಿಂದ ನಡೆಸಲು ತೀರ್ಮಾನಿಸಲಾಯಿತು.
ಮೈಸೂರು ಶ್ರೀಮಠದಲ್ಲಿ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಜಾತ್ರೆ ಆಚರಣೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಫೆಬ್ರವರಿ 6ರಿಂದ ಆರಂಭವಾಗುವ ಜಾತ್ರಾ ಮಹೋತ್ಸವದಲ್ಲಿ ಆರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಸುತ್ತೂರಿನ ಶ್ರೀಮಠದಿಂದ ಆದಿಜಗದ್ಗುರು ಶಿವಯೋಗಿಗಳ ಉತ್ಸವಮೂರ್ತಿಯನ್ನು ಕರ್ತೃ ಗದ್ದುಗೆಗೆ ತರುವುದರೊಂದಿಗೆ ಜಾತ್ರೆ ಆರಂಭಗೊಳ್ಳಲಿದೆ.
ಫೆಬ್ರವರಿ 7ರಂದು ಉಚಿತ ಸಾಮೂಹಿಕ ವಿವಾಹ, 8ರಂದು ರಥೋತ್ಸವ, 9ರಂದು ಶ್ರೀ ಮಹದೇಶ್ವರಕೊಂಡೋತ್ಸವ, 10ರಂದು ತೆಪ್ಪೋತ್ಸವ ನಡೆಯಲಿದ್ದು, ಫೆ.11ರಂದು ಜಾತ್ರೆಗೆ ತೆರೆಬೀಳಲಿದೆ. ಇದೇ ವೇಳೆ ಕರ್ತೃಗದ್ದುಗೆ, ಮಹದೇಶ್ವರ, ವೀರಭದ್ರೇಶ್ವರದೇವಸ್ಥಾನ ಮುಂತಾದ ಕಡೆಗಳಲ್ಲಿ ವಿಶೇಷ ಪೂಜಾಕೈಂಕರ್ಯಗಳು ನಡೆಯಲಿವೆ.
ಸುಮಾರು ಆರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಆರೋಗ್ಯ ಮೇಳ, ಕೃಷಿ ಮೇಳ, ಉತ್ಪಾದಕ ಮತ್ತು ಗ್ರಾಹಕ ಮೇಳ, ಕ್ರೀಡಾ ಮೇಳ, ಸಾಂಸ್ಕೃತಿಕ ಮೇಳ, ಶೈಕ್ಷಣಿಕ ಮೇಳ, ಸಾಹಿತ್ಯ ಮತ್ತು ಪುಸ್ತಕ ಮೇಳ, ಸರ್ವಧರ್ಮ ಸಮ್ಮಿಲನ, ಸಾಮೂಹಿಕ ವಿವಾಹ, ವಿವಿಧ ವಸ್ತು ಪ್ರದರ್ಶನಗಳು, ದನಗಳ ಜಾತ್ರೆ, ಜಾನಪದ ಜಾತ್ರೆ, ಕುಸ್ತಿ ಪಂದ್ಯಾವಳಿ, ನಗೆ ಉತ್ಸವ, ನಾಟಕ, ನೃತ್ಯ, ವಚನಗಾಯನ, ಸುಗಮ ಸಂಗೀತ, ಯಕ್ಷಗಾನ...... ಹೀಗೆ ಎಲ್ಲಾ ರೀತಿಯ ಕಾರ್ಯಕ್ರಮಗಳು ಇಲ್ಲಿ ನಡೆಯಲಿವೆ.