SSLC ಪರೀಕ್ಷೆ ಬರೆಯಬೇಕಾದ ಇಬ್ಬರು ವಿದ್ಯಾರ್ಥಿಗಳು ಮೃತ್ಯು
ಶಿವಮೊಗ್ಗ: ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಸ್ತೆ ಅಪಘಾತದಲ್ಲಿ, ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುವ ವೇಳೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು,ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ದುರ್ದೈವಿ. ಪ್ರಕರಣ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮತ್ತೊಬ್ಬ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆನಂದಪುರದ ಕೆಪಿಎಸ್ಸಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದಿಕೊಳ್ಳುತ್ತಿದ್ದು ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದನು. ಆದರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.