ಇಂದು 'ವಿಶ್ವ ಮಾನವ ದಿನಾಚರಣೆ': ರಾಷ್ಟ್ರಕವಿಯ ವಿಶ್ವ ಮಾನವ ಸಂದೇಶ ಏನಾಗಿತ್ತು ?
ಇಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ. ಅವರ ಗೌರವಾರ್ಥ ಡಿಸೆಂಬರ್ 29 ನ್ನು ಕರ್ನಾಟಕ ಸರ್ಕಾರವು 'ವಿಶ್ವ ಮಾನವ ದಿನಾಚರಣೆ' ಎಂದು ಘೋಷಿಸಿದೆ.
ಈ ದಿನ ಎಲ್ಲ ಶಾಲಾ-ಕಾಲೇಜುಗಳಲ್ಲಿಯೂ ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತಂತೆ ವಿಚಾರ ಗೋಷ್ಠಿಗಳನ್ನು ಏರ್ಪಡಿಸುವ ಮೂಲಕ ‘ವಿಶ್ವ ಮಾನವ ದಿನಾಚರಣೆ’ಯನ್ನು ಅರ್ಥಪೂರ್ಣವನ್ನಾಗಿ ಆಚರಿಸಲು ನಿರ್ದೇಶನ ನೀಡಲಾಗಿದೆ.
ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ. ಅಂತಹ ಮಹಾನ್ ಚೇತನ ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತು ವಿಚಾರ ಗೋಷ್ಠಿ ಏರ್ಪಡಿಸುವ ಮೂಲಕ ಅವರ ಜನ್ಮ ದಿನಾಚರಣೆಯನ್ನು ‘ವಿಶ್ವ ಮಾನವ ದಿನಾಚರಣೆ’ಯನ್ನಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಲಾ-ಕಾಲೇಜು ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.
ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ, ತಾಯಿ ಸೀತಮ್ಮ.ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ, ಮಾಧ್ಯಮಿಕ ಶಿಕ್ಷ ಣ ತೀರ್ಥಹಳ್ಳಿಯಲ್ಲಿ ನಡೆಯಿತು. ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು.
ಮೈಸೂರಿನ ಒಂಟಿಕೊಪ್ಪಲಿನ ‘ ಉದಯರವಿ’ ಮನೆಯಲ್ಲಿ ನೆಲೆಸಿದ್ದ ಕುವೆಂಪು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ.
ಕುವೆಂಪು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ಅವರ ಹುಟ್ಟೂರಾದ ಕುಪ್ಪಳ್ಳಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.
ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋುಷಿ. ತಮ್ಮ ಮೇರು ಕೃತಿ ಶ್ರೀರಾಮಾಯಣ ದರ್ಶನಂನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ ’ಕಾನೂರು ಹೆಗ್ಗಡತಿ’ ಹಾಗೂ ’ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. 1995ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1958ರಲ್ಲಿ ಪದ್ಮಭೂಷಣ, 1964ರಲ್ಲಿ ಕರ್ನಾಟ ಸರಕಾರದಿಂದ ರಾಷ್ಟ್ರಕವಿ, 1968ರಲ್ಲಿ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಭಾರತೀಯ ಜ್ಞಾನಪೀಠ ಪ್ರಶಸ್ತಿ, 1987ರಲ್ಲಿ ಪಂಪ ಪ್ರಶಸ್ತಿ, 1989ರಲ್ಲಿ ಪದ್ಮವಿಭೂಷಣ, 1992ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಲಭಿಸಿದೆ.
ವಿಶ್ವ ಮಾನವ ಸಂದೇಶ:
ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ಆ ನಂತರ ಆ ಮಗುವನ್ನು ಜಾತಿ ,ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ. ಬುದ್ಧ, ಬಸವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕೆಂದು ಅವರು ಹೇಳುತ್ತಿದ್ದರು.